ನಾಡಿನ ಪ್ರಗತಿಯಲ್ಲಿ GIMಗಳ ಪಾತ್ರವಿದೆಯೇ?
ಮತ್ತೊಂದು ವಿಶ್ವ ಹೂಡಿಕೆದಾರರ ಸಮ್ಮೇಳನ ನಡೆಯುತ್ತಿದೆ. ಸರ್ಕಾರದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ಈಗ ಮತ್ತೊಮ್ಮೆ ದೇಶ ವಿದೇಶಗಳಲ್ಲೆಲ್ಲ ಸುತ್ತಿ ಬಂದು ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶಿ ಬಂಡವಾಳಿಗರಿಗೆ ರತ್ನಗಂಬಳಿ ಹಾಸಿದ್ದಾರೆ. ಈ ಸಲ ೫ ಲಕ್ಷ ಕೋಟಿ ಬಂಡವಾಳ, ೧೦ ಲಕ್ಷ ಉದ್ಯೋಗ ಮತ್ತು ೨೦೨೦ರೊಳಗೆ ರಾಜ್ಯದ ಒಟ್ಟು ಉತ್ಪನ್ನ ದ್ವಿಗುಣಗೊಳ್ಳಬೇಕೆನ್ನುವ ಮಹತ್ವಕಾಂಕ್ಷೆಯನ್ನು ಕೈಗಾರಿಕಾ ಸಚಿವರು ಮತ್ತು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ವ್ಯಕ್ತಪಡಿಸಿದ್ದಾರೆ. ಅಮೆರಿಕದ ಭಾರೀ ಉದ್ದಿಮೆಪತಿ ವಾರನ್ ಬಫೆಟ್ ಅವರನ್ನೇ ಈ ಸಲ ಕರೆದು ಕೂರಿಸಲಾಗುವುದು ಎಂದು ಹೇಳಿಕೆ ನೀಡಿದ್ದರೂ ಅವರು ಒಪ್ಪಲಿಲ್ಲವೋ ಏನು ಕತೆಯೋ ಕೊನೆಗೆ ಜಪಾನು ಜರ್ಮನಿಗಳ ಉಪಸಚಿವ, ಉಪಪ್ರಧಾನಿಗಳ ಉಪಸ್ಥಿತಿಗೇ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ನಮ್ಮ ಸರ್ಕಾರಗಳು ಕಳೆದ ೧೨ ವರ್ಷಗಳಿಂದ ಈ ವಿಶ್ವ ಹೂಡಿಕೆದಾರರ ಸಮ್ಮೇಳನಗಳನ್ನು (ಜಿಮ್) ಸಂಘಟಿಸುತ್ತಲೇ ಬಂದಿವೆ. ಮೊದಲ ಜಿಮ್ ೨೦೦೦ರ ಜೂನ್ ತಿಂಗಳಿನಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ನಾಯಕತ್ವದಲ್ಲಿ ಆಯೋಜನೆಗೊಂಡು ಆಗ ೧೩,೦೦೦ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ ಒಪ್ಪಂದಗಳಾಗಿದ್ದರೆ ಯಡಿಯೂರಪ್ಪನವರು ಹಾಗೂ ಮುರುಗೇಶ್ ನಿರಾಣಿಯವರು ಆಯೋಜಿಸಿದ್ದ ಕಡೆಯ ೨೦೧೦ರ ಜಿಮ್ ನಲ್ಲಿ ಸುಮಾರು ೫ ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಒಪ್ಪಂದಗಳಾಗಿತ್ತು. ಹೀಗೆ ನಿರಂತರವಾಗಿ ನಡೆಸಿಕೊಂಡ...